ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಆಯೋಜಿಸಿರುವ ಪಿಎಸ್ಐ ಪರೀಕ್ಷೆಯ ನೇಮಕಾತಿ ತರಬೇತಿ ಶಿಬಿರ ಸೆ.17ರ ಶುಕ್ರವಾರ ಆರಂಭಗೊಳ್ಳಲಿದೆ.
ಮುಕ್ತ ವಿವಿಯ ಕಾವೇರಿ ಸಭಾಂಗಣದಲ್ಲಿ ಅಂದು ಬೆಳಗ್ಗೆ 11ಕ್ಕೆ ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಉಪ ಆಯುಕ್ತ ಪ್ರದೀಪ್ ಗುಂಟಿ ಅವರು ಆನ್ಲೈನ್ ಶಿಬಿರಕ್ಕೆ ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಕುರಿತು ಮಾರ್ಗದರ್ಶನ ನೀಡುವರು. ಪೊಲೀಸ್ ಇಲಾಖೆ ನಿವೃತ್ತ ಎಸ್ಪಿ ಶಂಕರೇಗೌಡ ಅವರು ಮುಖ್ಯ ಅತಿಥಿಯಾಗಿ ಆಗಮಿಸುವರು. ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಅಧ್ಯಕ್ಷತೆ ವಹಿಸಲಿದ್ದು, ಕುಲಸಚಿವ ಪ್ರೊ.ಆರ್.ರಾಜಣ್ಣ ಉಪಸ್ಥಿತರಿರುವರು ಎಂದು ಕೇಂದ್ರದ ಸಂಯೋಜನಾಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಪಿಎಸ್ಐ ನೇಮಕಕ್ಕೆ ಅಸೂಚನೆ ಹೊರಡಿಸಿದ್ದು, ಇದಕ್ಕಾಗಿ ವಿಶ್ವವಿದ್ಯಾನಿಲಯವು ತರಬೇತಿಯನ್ನು ಆರಂಭಿಸುತ್ತಿದ್ದು, ರಾಜ್ಯದ ನಾನಾ ಭಾಗಗಳಿಂದ ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಆಸಕ್ತರು 0821- 2515944 ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.